ಮೂಡುಬಿದಿರೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ ಟ್ರಸ್ಟ್ ವತಿಯಿಂದ 27 ರಿಂದ 5 ದಿನಗಳ ಕಾಲ ನಡೆಯಲಿರುವ 62 ನೇ ಮೂಡುಬಿದಿರೆ ಶ್ರೀ ಗಣೇಶೋತ್ಸವಕ್ಕೆ ಸಕಲ ಸಿದ್ಧತೆಗಳು ನಡೆಯುತ್ತಿದ್ದು ಅತ್ಯಂತ ಸುಸೂತ್ರವಾಗಿ ಇಲ್ಲಿನ ಗಣೇಶೋತ್ಸವ ನಡೆಯಲಿದೆ ಎಂದು ಟ್ರಸ್ಟ್ ಅಧ್ಯಕ್ಷ ನಾರಾಯಣ ಪಿ.ಎಂ.ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಗಣೇಶೋತ್ಸವದ ಪ್ರಯುಕ್ತ ನಡೆದ ಕೆಲವೊಂದು ಸ್ಪರ್ಧೆಗಳು ಈಗಾಗಲೇ ನಡೆದಿದ್ದು ನಿಗದಿಯಾಗಿರುವ ಎಲ್ಲಾ ಕಾರ್ಯಕ್ರಮಗಳು ನಿಗದಿತ ಸಮಯದಲ್ಲೇ ನಡೆಯಲಿದೆ. ಕೊನೆಯ ದಿನ ನಡೆಯಲಿರುವ ವೈಭವದ ಶೋಭಾಯಾತ್ರೆಯು ಹನ್ನೊಂದು ಗಂಟೆಯೊಳಗೆ ಮುಗಿಯಲಿದೆ ಎಂದರು.
26 ರಂದು ಹಸಿರು ಹೊರೆಕಾಣಿಕೆ ಬರಲಿದ್ದು 27 ರಂದು ಬೆಳಿಗ್ಗೆ 9-30 ಕ್ಕೆ ಡಾ.ಎಂ.ಮೋಹನ ಆಳ್ವ ಅವರು ಗಣೇಶೋತ್ಸವವನ್ನು ಉದ್ಘಾಟಿಸಲಿದ್ದಾರೆ,ಬಳಿಕ ವೇದಮೂರ್ತಿ ಈಶ್ವರ ಭಟ್ ಅಲಂಗಾರು ಅವರಿಂದ ಶ್ರೀ ಮಹಾಗಣಪತಿ ದೇವರ ವಿಗ್ರಹ ಪ್ರತಿಷ್ಠಾಪನೆ ನಡೆಯಲಿದೆ ಎಂದರು.

ಸಂಜೆ ನಡೆಯಲಿರುವ ಸಾಂಸ್ಕೃತಿಕ ಕಾರ್ಯಕ್ರಮವನ್ನು ಜೀವನ್ ರಾಂ ಸುಳ್ಯ ಅವರು ಉದ್ಘಾಟಿಸಲಿದ್ದು ಮೂಡುಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಪಿ.ಜಿ, ಪುರಸಭಾ ಮುಖ್ಯಾಧಿಕಾರಿ ಇಂದು ಎಂ, ಮೂಡಾ ಅಧ್ಯಕ್ಷ ಹರ್ಷವರ್ಧನ ಪಡಿವಾಳ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.ಪ್ರತಿದಿನ ಸಂಜೆ 6-30ರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ ಎಂದು ಮಾಹಿತಿ ನೀಡಿದರು.
30 ರಂದು ಸಂಜೆ 3-30 ರಿಂದ ಧಾರ್ಮಿಕ ಸಭೆ ಹಾಗೂ ಬಹುಮಾನ ವಿತರಣೆ ನಡೆಯಲಿದ್ದು ಟ್ರಸ್ಟ್ ಅಧ್ಯಕ್ಷ ನಾರಾಯಣ ಪಿ.ಎಂ.ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಮಹಾವೀರ ಕಾಲೇಜಿನ ಪ್ರಾಂಶುಪಾಲರಾದ ಡಾ.ರಾಧಾಕೃಷ್ಣ ಶೆಟ್ಟಿ ಧಾರ್ಮಿಕ ಉಪನ್ಯಾಸ ನೀಡಲಿದ್ದಾರೆ.
ಸಂಸದ ಬ್ರಿಜೇಶ್ ಚೌಟ,ಶಾಸಕ ಉಮಾನಾಥ ಕೋಟ್ಯಾನ್, ಮಾಜಿ ಸಚಿವ ಕೆ.ಅಭಯಚಂದ್ರ, ತಹಶಿಲ್ದಾರ್ ಶ್ರೀಧರ್ ಮುಂದಲಮನಿ,ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶ್ರೀಧರ್,ಪುರಸಭಾಧ್ಯಕ್ಷೆ ಜಯಶ್ರೀ ಕೇಶವ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆಂದು ಹೇಳಿದರು.
ಟ್ರಸ್ಟ್ ಉಪಾಧ್ಯಕ್ಷರಾದ ಕೊರಗ ಶೆಟ್ಟಿ, ರಾಜಾರಾಮ್ ನಾಗರಕಟ್ಟೆ,ಕೋಶಾಧಿಕಾರಿ ಚೇತನ್ ಕುಮಾರ್ ಶೆಟ್ಟಿ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.






